ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು” ಎಂದು ಡಾ. ಮುರುಗೇಶ ಮನೋಹರನ್ ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

”ಸದ್ಯ ಸುಗಮ ಚೇತರಿಕೆಗೆ ನೆರವಾಗಲು ಅಗತ್ಯ ಚಿಕಿತ್ಸೆ ಮುಂದುವರೆಸಲಾಗಿದೆ. ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ತಂಡದಿಂದ ಅತ್ಯುತ್ತಮ ಆರೈಕೆ ನಡೆಯುತ್ತಿದೆ. ಶಿವರಾಜ್ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಹಾಗೂ ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಶಿವರಾಜ್ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು” ಎಂದು ಗೀತಾ ಶಿವರಾಜ್ಕುಮಾರ್ ಮಾಹಿತಿ ನೀಡಿದ್ದಾರೆ.
ಶಿವರಾಜ್ಕುಮಾರ್ ಕಳೆದ ಬುಧವಾರ ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದರು. ಫ್ಲೋರಿಡಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ಕೆಲ ದಿನಗಳ ಕಾಲ ವಿಶ್ರಾಂತಿ ಪಡೆದು ಜನವರಿ ಅಂತ್ಯದ ವೇಳೆಗೆ ಸ್ವದೇಶಕ್ಕೆ ವಾಪಸಾಗಲಿದ್ದಾರೆ.

ಶಿವರಾಜ್ಕುಮಾರ್ ಯುಎಸ್ ಪ್ರಯಾಣದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಚಿತ್ರರಂಗ ಸೇರಿದಂತೆ ಸಿನಿಮಾ, ರಾಜಕೀಯ ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಭೇಟಿ ಕೊಟ್ಟು ಗುಣಮಟ್ಟದ ಸಮಯ ಕಳೆದಿದ್ದರು. ನಟ ಕಿಚ್ಚ ಸುದೀಪ್, ಮಾಜಿ ಸಚಿವ ಬಿ.ಸಿ.ಪಾಟೀಲ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಗಣ್ಯರಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಅದರಲ್ಲೂ ಕಿಚ್ಚ ಸುದೀಪ್ ಭಾವುಕರಾದ ಕ್ಷಣ, ಶಿವಣ್ಣನನ್ನು ಅಪ್ಪಿಕೊಂಡಿದ್ದ ಫೋಟೋ ಕಂಡ ಅಭಿಮಾನಿಗಳು ಮರುಗಿದ್ದರು.
ಅಲ್ಲದೆ, ಶಿವಣ್ಣನಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲೆಂದು ಪ್ರಾರ್ಥಿಸಿ ಅಭಿಮಾನಿಗಳು ರಾಜ್ಯದ ಹಲವೆಡೆ ದೇವಸ್ಥಾನಗಳಲ್ಲಿ ಉರುಳು ಸೇವೆ, ಕೇಶ ಮುಂಡನೆ ಹಾಗೂ ಮಹಾ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿದ್ದರು.





