
ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ. ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.





