
ಬಂಗಾಲ ಉಪಸಾಗರದ ನೈರುತ್ಯ ಭಾಗದಲ್ಲಿ ವಾಯ ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆಯ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಹೊರತುಪಡಿಸಿ ರಾಜ್ಯದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ.
ಇಂದು ಮತ್ತು ನಾಳೆ ಹಾಸನ, ಮೈಸೂರು, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ನಗರ ಜಿಲ್ಲೆ ಕರ್ನಾಟಕದ ಒಳಭಾಗದ ಮೇಲೆ ಪ್ರತ್ಯೇಕವಾದ ಸ್ಥಳಗಳಲ್ಲಿ ಮಂಜು ಇರಲಿದೆ. ನಾಳೆ ಬೆಳಿಗ್ಗೆ ಸಂದರ್ಭದಲ್ಲಿ ಬೆಂಗಳೂರು ಸುತ್ತಮುತ್ತ ಮಂಜು ಕವಿದ ವಾತಾವರಣ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭ.

ರಾಜಧಾನಿಯಲ್ಲಿ ಚುಮು ಚುಮು ಚಳಿ ಆರಂಭವಾಗಿದ್ದು, ಸಂಜೆ ಆಗುತ್ತಿದ್ದಂತೆಯೇ ಶುರುವಾಗುವ ಚಳಿ ಮರುದಿನ ಸೂರ್ಯೋದಯದವರೆಗೂ ಹಾಗೆಯೇ ಇರುತ್ತದೆ. ಅವಧಿಗೂ ಮುನ್ನವೇ ಬೆಂಗಳೂರಿನಲ್ಲಿ ಭಾರೀ ಚಳಿ ಆರಂಭವಾಗಿತ್ತು. ಬಳಿಕ ಕೊಂಚ ಕಡಿಮೆಯಾಗಿತ್ತಾದರೂ ಬಳಿಕ ಬಂದ ಸೈಕ್ಲೋನ್ನಿಂದ ಬಿಸಿಲೇ ಇಲ್ಲದಂತಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ.
ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಜಿನುಗುತ್ತಿದೆ.
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.





