
ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಎಸ್ಐಟಿ ರಚನೆ ಮಾಡಿದ್ದಾರೆ. ಹಾಗಾದರೆ ಕಂದಾಯ ಇಲಾಖೆ ಅಷ್ಟೊಂದು ಶಕ್ತಿಶಾಲಿಯಾಗಿದೆಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಭೂ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಉಳಿದ 71 ಎಕರೆ ಭೂಮಿ ಒತ್ತುವರಿಯನ್ನು ತೆರವು ಮಾಡಬೇಕಾಗಿದೆ ಅಲ್ಲವೇ ಎಂದು ವಿಭಾಗಿಯ ಪೀಠ ಸರ್ಕಾರವನ್ನು ಪ್ರಶ್ನಿಸಿತು.
ಇಷ್ಟೇ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಭೂ ಒತ್ತುವರಿ ತೆರವು ಕಾರ್ಯಚರಣೆಗೆ ಮುಂದಾಗಿದೆ.





