
ಸಿಎಂ ಸಿದ್ದರಾಮಯ್ಯ ಅವರು ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯಗಳು ನೆರವೇರಿದವು. ಕೆಆರ್ಎಸ್ ಜಲಾಶಯಕ್ಕೆ 4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿ ಖುಷಿ ಪಟ್ಟರು. ನಂತರ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಇದೇ ವೇಳೆ ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು ತಾಯಿ ಕಾವೇರಿ ಬಳಿ ಪ್ರಾರ್ಥನೆ ಮಾಡಿದರು.

ದಾಖಲೆ ಬರೆದ ಸಿಎಂ
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾದರೂ ಈ ಹಿಂದಿನ ಯಾವ ಮುಖ್ಯಮಂತ್ರಿ ಕೂಡ ಜೂನ್ನಲ್ಲಿ ಬಾಗಿನ ಅರ್ಪಿಸಿರಲಿಲ್ಲ. ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರು ಜೂನ್ನಲ್ಲೇ ಕೆಆರ್ಎಸ್ಗೆ ಬಾಗಿನ ಸಮರ್ಪಣೆ ಮಾಡಿ ನೂತನ ದಾಖಲೆ ಬರೆದಿದ್ದಾರೆ.

ಕೆಆರ್ಎಸ್ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಶೃಂಗಾರ ಮಾಡಲಾಗಿತ್ತು. ಅಣೆಕಟ್ಟೆ ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದವು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚಲುವರಾಯಸ್ವಾಮಿ, ಹೆಚ್. ಸಿ ಮಹದೇವಪ್ಪ, ಕೆ ವೆಂಕಟೇಶ್, ಎನ್.ಎಸ್ ಬೋಸರಾಜು ಹಾಗೂ ಸ್ಥಳೀಯ ಶಾಸಕರು ಇದ್ದರು.





