
ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸಲು ತಿಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಮತ್ತು ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಏಕಸದಸ್ಯ ಪೀಠ ನೀಡಿರುವ ಆದೇಶವನ್ನು ಎತ್ತಿ ಹಿಡಿದು, ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಹೈಕೋರ್ಟ್ನ ಈ ಆದೇಶದಿಂದಾಗಿ ಲಾಠಿ ಚಾರ್ಜ್ ನಡೆಸಲು ಪೊಲೀಸರಿಗೆ ಸೂಚನೆ ನೀಡಿದ್ದು ಯಾರು?, ಅದರ ಹಿಂದಿರುವವರು ಯಾರು? ಎಂಬುದರ ಸಂಬಂಧ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕಾಗಿದೆ. ಪ್ರಕರಣದ ಹಿನ್ನೆಲೆ: 2024ರ ಡಿಸೆಂಬರ್ 10ರಂದು ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಮೀಸಲಾತಿ ಕೋರಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸ್ ಲಾಠಿ ಚಾರ್ಜ್ ನಡೆದಿದ್ದು, ಘಟನೆಯನ್ನು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೋರಿ ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಈ ಹಿಂದೆ ಏಕಸದಸ್ಯ ಪೀಠದ ನಡೆದ ವಿಚಾರಣೆ ವೇಳೆ ಸ್ವಾಮೀಜಿ ಪರ ವಕೀಲರು, ”ನಿಷೇಧಾಜ್ಞೆ ವಿಧಿಸಿರುವಾಗಲೇ ನಿರ್ದಿಷ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಸಿಕ್ಕಿತ್ತು. ಸಚಿವರು ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನಾಕಾರರು ಹೊರಟಿದ್ದರು.
ಆ ಸಂದರ್ಭದಲ್ಲಿ ಲಾಠಿ ಚಾರ್ಜ್ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಧಾರ್ಮಿಕ ಮುಖಂಡರು, ಶಾಸಕರು ಮತ್ತು ಮಾಜಿ ಶಾಸಕರು ಭಾಗವಹಿಸಿದ್ದರು. ಹೀಗಿರುವಾಗ ಅಲ್ಲಿ ಮದ್ಯ ಸೇವಿಸುತ್ತಿದ್ದರು, ಕಲ್ಲು ಎಸೆದಿದ್ದಾರೆ ಎಂದು ಸರ್ಕಾರ ಹೇಳಬಾರದು. ನಾವು ಎಲ್ಲಾ ವಿಡಿಯೋಗಳನ್ನು ಪರಿಶೀಲಿಸಿದ್ದು, ಎಲ್ಲವೂ ಲಾಠಿ ಚಾರ್ಜ್ ಆದ ಬಳಿಕದ ವಿಡಿಯೋಗಳಾಗಿವೆ” ಎಂದು ವಾದಿಸಿದ್ದರು.

”ಕಾರ್ಯಕಾರಿ ಮ್ಯಾಜಿಸ್ಟ್ರೇಟ್ ಉಪಸ್ಥಿತಿಯ ಬಗ್ಗೆ ಸರ್ಕಾರದ ಆಕ್ಷೇಪಣೆಯಲ್ಲಿ ವಿವರಿಸಲಾಗಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರುವುದರಿಂದ ನಿಷ್ಪಕ್ಷಪಾತವಾದ ತನಿಖೆ ಅಗತ್ಯವಾಗಿದೆ. ಪ್ರತಿಭಟನೆ ಮೂಲಭೂತ ಹಕ್ಕಾಗಿದ್ದು, ಲಾಠಿ ಚಾರ್ಜ್ ಮೂಲಕ ಅದನ್ನು ಹತ್ತಿಕ್ಕಬಾರದಿತ್ತು” ಎಂದು ಪೀಠಕ್ಕೆ ವಿವರಿಸಿದ್ದರು.
ಸರ್ಕಾರ ಪರ ವಕೀಲರು, ”ಸುವರ್ಣ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಿಗದಿತ ಸ್ಥಳ ತೊರೆಯದಂತೆ ಪ್ರತಿಭಟನಾಕಾರರಿಗೆ ಎಡಿಜಿಪಿ ಸೂಚಿಸುತ್ತಿರುವ ವಿಡಿಯೋ ಮತ್ತು ಚಿತ್ರಗಳಿವೆ. ಪ್ರತಿಭಟನಾಕಾರರು ಕಲ್ಲು ಮತ್ತು ಚಪ್ಪಲಿಗಳನ್ನು ಪೊಲೀಸರತ್ತ ಎಸೆದಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋಗಳಿವೆ. ಪ್ರತಿಭಟನೆಗೆ ನಿಗದಿಯಾಗಿದ್ದ ಸ್ಥಳಕ್ಕೆ ಮರಳುವಂತೆ ಪೊಲೀಸರು ಮನವಿ ಮಾಡಿದ್ದಾರೆ” ಎಂದು ತಿಳಿಸಿದ್ದರು.
”ಪೊಲೀಸರಿಂದ ಲಾಠಿ ಕಸಿದುಕೊಂಡು ಅದರಿಂದ ಪೊಲೀಸರಿಗೆ ಹಲ್ಲೆ ಮಾಡುವ ದೃಶ್ಯಗಳಿವೆ. ರಾಷ್ಟ್ರೀಯ ಹೆದ್ದಾರಿ ತಡೆದು, ಫೆನ್ಸ್ ದಾಟುತ್ತಿರುವ ವಿಡಿಯೋಗಳಿವೆ.

ಅಲ್ಲದೆ, ನ್ಯಾಯಾಲಯದ ಆದೇಶದ ಪ್ರಕಾರ ಶಾಂತಿಯುತವಾಗಿ ಪ್ರತಿಭಟಿಸಲು ಪ್ರತಿಭಟನಾಕಾರರಿಗೆ ಅನುಮತಿಸಲಾಗಿತ್ತು. ಇದನ್ನು ಮೀರಿ ಪ್ರತಿಭಟನೆಯಲ್ಲಿ ಕೆಲವು ಗಲಭೆಕೋರರು ಕಾನೂನು ಕೈಗೆ ತೆಗೆದುಕೊಂಡಿದ್ದಾರೆ. ಇದರಿಂದ 23 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳು ಜಖಂಗೊಂಡಿವೆ” ಎಂದು ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ರಾಜ್ಯ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಬೇಕು. ಆಯೋಗವು ಕಾಲ ಮಿತಿಯಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು





