ಮಂಗಳೂರು: ಧರ್ಮಸ್ಥಳದ ‘ಬುರುಡೆ’ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಹೇಳಿ ಆರೋಪ ಮಾಡಿದ್ದ ವ್ಯಕ್ತಿಯನ್ನೇ ಈಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರಿಂದ, ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಅಸಲಿ ಮುಖ ಬಹಿರಂಗಗೊಂಡಿದೆ. ಪ್ರಸ್ತುತ, ಎಸ್ಐಟಿ ಅಧಿಕಾರಿಗಳು ಆತನನ್ನು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಬೆಳವಣಿಗೆಯ ನಂತರ, ‘ಮಾಸ್ಕ್ ಮ್ಯಾನ್’ ಆರೋಪಗಳನ್ನು ಬೆಂಬಲಿಸುತ್ತಿದ್ದ ಹೋರಾಟಗಾರರು ಈಗ ಒಬ್ಬೊಬ್ಬರಾಗಿ ದೂರ ಸರಿಯುತ್ತಿದ್ದಾರೆ. ಸೌಜನ್ಯ ಪ್ರಕರಣದ ಹೋರಾಟದಲ್ಲಿ ಸಕ್ರಿಯರಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ‘ಮಾಸ್ಕ್ ಮ್ಯಾನ್’ ಆರೋಪಗಳನ್ನು ಪರೋಕ್ಷವಾಗಿ ಬೆಂಬಲಿಸಿದ್ದರು. ಅಲ್ಲದೆ, ಈ ಪ್ರಕರಣ ತಣ್ಣಗಾಗದಂತೆ ನೋಡಿಕೊಳ್ಳುತ್ತಿದ್ದರು. ಆದರೆ, ‘ಮಾಸ್ಕ್ ಮ್ಯಾನ್’ ತೋರಿಸಿದ 17 ಸ್ಥಳಗಳಲ್ಲಿ ಯಾವುದೇ ಶವಗಳು ಪತ್ತೆಯಾಗದ ಕಾರಣ, ಎಸ್ಐಟಿ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.
ಇದರ ಜೊತೆಗೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ತಿಮರೋಡಿ ಬಂಧನದ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಹೋರಾಟ ತಪ್ಪಾದ ಹಾದಿ ಹಿಡಿದಿರುವುದು ಅರಿವಾಗುತ್ತಿದ್ದಂತೆ, ಗಿರೀಶ್ ಮಟ್ಟಣ್ಣನವರ್ ಮತ್ತು ಇತರ ಹೋರಾಟಗಾರರು ಈಗ ದೂರ ಸರಿಯುತ್ತಿದ್ದಾರೆ. ‘ಮಾಸ್ಕ್ ಮ್ಯಾನ್’ ಚಿನ್ನಯ್ಯನನ್ನು ಎಸ್ಐಟಿ ಬಂಧಿಸಿರುವುದನ್ನು ಗಿರೀಶ್ ಮಟ್ಟಣ್ಣನವರ್ ಸ್ವಾಗತಿಸಿದ್ದಾರೆ. ಜೊತೆಗೆ, ಆತನಿಗೆ ಮಂಪರು ಪರೀಕ್ಷೆ ನಡೆಸುವಂತೆ ಸಲಹೆ ನೀಡಿದ್ದಾರೆ. ಒಂದು ವೇಳೆ ಎಸ್ಐಟಿ ವಿಚಾರಣೆಗೆ ಕರೆದರೆ ಸಹಕರಿಸಲು ಸಿದ್ಧ ಎಂದೂ ಅವರು ಹೇಳಿದ್ದಾರೆ. ಇನ್ನೊಂದೆಡೆ, ಧರ್ಮಸ್ಥಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಯೂಟ್ಯೂಬರ್ ಧೂತ ಸಮೀರ್ಗೂ ಸಂಕಷ್ಟ ಶುರುವಾಗಿದೆ. ಪೊಲೀಸರು ಬೆಂಗಳೂರಿನಲ್ಲಿ ಆತನ ಪತ್ತೆಗೆ ಹುಡುಕಾಟ ನಡೆಸುತ್ತಿದ್ದು, ಬಂಧನ ಭೀತಿಯಲ್ಲಿರುವ ಸಮೀರ್ ತಲೆಮರೆಸಿಕೊಂಡಿದ್ದಾರೆ.





