ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದ ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಕೇವಲ ಮಾಧ್ಯಮಗಳ ವರದಿಯನ್ನು ಆಧರಿಸಿ, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ನ್ಯಾಯಾಲಯದ ಮೆಟ್ಟಿಲೇರಿದ ಬೆಂಗಳೂರಿನ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಅವರಿಗೆ ನ್ಯಾಯಪೀಠವು ಒಟ್ಟು 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
ನ್ಯಾಯಪೀಠದ ಕಠಿಣ ವಿನಾಶ ಮತ್ತು ಅಸಮಾಧಾನ:
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. “ಕೇವಲ ಪತ್ರಿಕಾ ಹೇಳಿಕೆಗಳನ್ನು ಆಧರಿಸಿ ಅವುಗಳನ್ನು ರದ್ದುಗೊಳಿಸಲು ನ್ಯಾಯಾಲಯದ ಅಸಾಧಾರಣ ನ್ಯಾಯವ್ಯಾಪ್ತಿಯನ್ನು ಬಳಸಲು ಸಾಧ್ಯವಿಲ್ಲ. ಅರ್ಜಿದಾರರು ಸರ್ಕಾರದ ಯಾವುದೇ ಅಧಿಕೃತ ಆದೇಶದ ಪ್ರತಿಗಳನ್ನು ಒದಗಿಸಿಲ್ಲ. ಇದು ನ್ಯಾಯಾಲಯದ ಸಮಯ ವ್ಯರ್ಥ ಮಾಡುವ ಮತ್ತು ಪ್ರಚಾರಕ್ಕಾಗಿ ಸಲ್ಲಿಸಿರುವ ಅರ್ಜಿಯಾಗಿದೆ,” ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ದಂಡದ ಮೊತ್ತ ಏರಿಕೆಗೆ ಕಾರಣವೇನು?:
ಆರಂಭದಲ್ಲಿ ನ್ಯಾಯಾಲಯವು ಅರ್ಜಿದಾರರಿಗೆ ತಲಾ 50 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಿತ್ತು. ಆದರೆ, ವಿಚಾರಣೆ ವೇಳೆ ಅರ್ಜಿದಾರರು ವಾದ ಮುಂದುವರಿಸಿ, “ಹಿಂದಿ ಭಾಷೆಯನ್ನೇ ತೆಗೆದುಹಾಕಲಾಗುತ್ತಿದೆ” ಎಂದು ಸುಳ್ಳು ಅಂಶವನ್ನು ಉಲ್ಲೇಖಿಸಿದರು. ಪತ್ರಿಕಾ ವರದಿಗಳಲ್ಲಿ ಅಂತಹ ಯಾವುದೇ ಅಂಶವಿಲ್ಲದಿದ್ದರೂ, ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠವು ದಂಡದ ಮೊತ್ತವನ್ನು 1 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿತು.
ದಂಡ ಪಾವತಿಗೆ ಸೂಚನೆ:
ವಿಧಿಸಲಾದ ದಂಡದ ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು ಎಂದು ಕೋರ್ಟ್ ಸೂಚಿಸಿದೆ. ಒಂದು ವೇಳೆ ಅರ್ಜಿದಾರರು ನಿಗದಿತ ಅವಧಿಯಲ್ಲಿ ದಂಡ ಪಾವತಿಸದಿದ್ದರೆ, ಅದನ್ನು ಭೂ ಕಂದಾಯ ಬಾಕಿ ಎಂದು ಪರಿಗಣಿಸಿ ಅರ್ಜಿದಾರರ ಆಸ್ತಿಯಿಂದ ವಸೂಲಿ ಮಾಡಲು ಕಂದಾಯ ಅಧಿಕಾರಿಗಳಿಗೆ ಅವಕಾಶ ನೀಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.





