ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದಾಗ, ತನಿಖೆಯಲ್ಲಿ ಸರ್ಕಾರಿ ಅಧಿಕಾರಿಗಳ ತಪ್ಪು ಸಾಬೀತಾದರೆ ಮತ್ತು ಸದನ ಬಯಸಿದರೆ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಮೃತಪಟ್ಟವರು ಅಕ್ರಮವಾಗಿ ಅರಣ್ಯಕ್ಕೆ ಪ್ರವೇಶಿಸಿದ ಬೇಟೆಗಾರರು ಎಂದು ತನಿಖೆಯಲ್ಲಿ ದೃಢಪಟ್ಟರೆ ಅವರಿಗೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸದನದಲ್ಲಿ ತಿಳಿಸಿದರು. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ. ಆ ವರದಿಯನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುವುದು, ಅದರಿಂದ ತೃಪ್ತಿಯಾಗದಿದ್ದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ವಿವರಣೆ ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಸಭೆಯಲ್ಲಿ ಪಟ್ಟು ಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಗಸ್ಟ್ 14 ರ ರಾತ್ರಿ ಅಕ್ರಮ ಬೇಟೆಯ ಕುರಿತು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದರು ಹಾಗೂ ಬೆಳಗಿನ ಜಾವ ಶಂಕಿತರು ದಾಳಿ ಮಾಡಲು ಮುಂದಾದಾಗ ಆತ್ಮರಕ್ಷಣೆಗಾಗಿ ಸ್ಲೈಡ್ ಆ್ಯಕ್ಷನ್ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು. ಘಟನಾ ಸ್ಥಳದಿಂದ ಎರಡು ನಾಡ ಬಂದೂಕುಗಳು, ಅಡುಗೆ ಪಾತ್ರೆಗಳು, ಮಸಾಲೆ ಪದಾರ್ಥಗಳು ಹಾಗೂ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದ ಅವರು, ಮೃತರು ಜಾನುವಾರುಗಳನ್ನು ಹುಡುಕಲು ಅರಣ್ಯಕ್ಕೆ ಹೋಗಿದ್ದರು ಎಂಬ ವಾದವನ್ನು ತಳ್ಳಿಹಾಕಿದರು. ಅಲ್ಲದೆ ಮೃತಪಟ್ಟವರ ಪೈಕಿ ಇಬ್ಬರ ವಿರುದ್ಧ ಈಗಾಗಲೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದವು ಎಂದು ಮಾಹಿತಿ ನೀಡಿದರು.




