
ಚಾನೆಲ್ ಚರ್ಚೆಯೊಂದರಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಯಾವುದೇ ಪೈಪೋಟಿಯಿಲ್ಲ. ಉಭಯ ತಂಡಗಳಿಂದ ಜಿದ್ದಾಜಿದ್ದಿನ ಕದನ ನಿರೀಕ್ಷೆಯನ್ನು ಸಹ ಮಾಡುವಂತಿಲ್ಲ. ಇಲ್ಲಿ ಆರ್ಸಿಬಿ ತಂಡವನ್ನು ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿಯಾಗಿ ಬಿಂಬಿಸಲಾಗಿದೆ. ಆದರೆ ಅಂತಹದ್ದೇನು ಇಲ್ಲ. ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿಯೇ ಇಲ್ಲ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಲವು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬಗ್ಗು ಬಡಿದಿದೆ. ಅಲ್ಲದೆ ಆರ್ಸಿಬಿ ವಿರುದ್ಧ ಸಿಎಸ್ಕೆ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಆರ್ಸಿಬಿ, ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿ ಎಂದು ನಾನಂತು ಭಾವಿಸುವುದಿಲ್ಲ.ನೀವು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದರಲ್ಲಿ ಅರ್ಥವಿದೆ. ಏಕೆಂದರೆ ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿ ಇದೆ. ಆದರೆ ಸಿಎಸ್ಕೆ ಮುಂದೆ ಆರ್ಸಿಬಿ ಸಾಮಾನ್ಯ ತಂಡ. ಹೀಗಾಗಿ ಉಭಯ ತಂಡಗಳನ್ನು ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸುವುದು ಸರಿಯಲ್ಲ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಂದಹಾಗೆ ಅಂಬಾಟಿ ರಾಯುಡು ಆರ್ಸಿಬಿ ತಂಡವನ್ನು ಹೀಯಾಳಿಸಿ ಮಾತನಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಹಲವು ಬಾರಿ ಆರ್ಸಿಬಿ ಹಾಗೂ ಅಭಿಮಾನಿಗಳನ್ನು ಗುರಿಯಾಗಿಸಿ ಹೇಳಿಕೆಗಳನ್ನು ನೀಡಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಆರ್ಸಿಬಿ ಪ್ಲೇಆಫ್ ಹಂತಕ್ಕೇರುವ ಸನಿಹದಲ್ಲಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್ಸಿಬಿ ಪ್ಲೇಆಫ್ಗೇರಲಿದೆಯಾ ಕಾದು ನೋಡಬೇಕಿದೆ.





