ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಿರುತೆರೆ ಎರಡರಲ್ಲೂ ತಮ್ಮ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯತೆ ಪಡೆದಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಬ್ಯಾಂಕ್ ಜನಾರ್ಧನ್ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ಬಾರಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಚಿಕಿತ್ಸೆಗಾಗಿ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಬ್ಯಾಂಕ್ ಜನಾರ್ಧನ್ ಸಾವನ್ನಪ್ಪಿದ್ದಾರೆ.
ನಟ ಬ್ಯಾಂಕ್ ಜನಾರ್ಧನ್ ಮೂಲತಃ ಚಿತ್ರದುರ್ಗದವರು. 1948ರಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಜನಿಸಿದವರು ಬ್ಯಾಂಕ್ ಜನಾರ್ಧನ್. ಶಾಲಾ ಶಿಕ್ಷಣವನ್ನ ಹುಟ್ಟೂರಲ್ಲೇ ಪಡೆದ ಜನಾರ್ಧನ್ ಆನಂತರ ಬ್ಯಾಂಕ್ನಲ್ಲಿ ಕೆಲಸ ಆರಂಭಿಸಿದರು. ಶಾಲಾ – ಕಾಲೇಜಿನಲ್ಲಿ ಓದುತ್ತಿದ್ದ ದಿನಗಳಲ್ಲೇ ಜನಾರ್ಧನ್ ಅವರಿಗೆ ನಾಟಕದ ಗೀಳು ಅಂಟಿತ್ತು. ಹಲವು ನಾಟಕಗಳಲ್ಲಿ ಅಭಿನಯಿಸಿದ ನಂತರ ಬ್ಯಾಂಕ್ ಜನಾರ್ಧನ್ 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.