ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ : ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ವಿರೋಧ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ : ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ವಿರೋಧ

ಕನ್ನಡದ ಮೇಲೆ ಕೇರಳ ಸರ್ಕಾರ ಸವಾರಿ ಮಾಡುವ ತರಲೆ ಬಿಟ್ಟಿಲ್ಲ. ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುತ್ತಿದೆ. ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಜಾರಿಗೆ ತರಲು ಹೊರಟ್ಟಿದ್ದು, ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್‌ನಲ್ಲೇನಿದೆ?
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ.

ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ.

 

ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ.

ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸುತ್ತೇನೆ.

ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ.

ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ.

ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ‍್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ) ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು.

ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಪೊರೆಯುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು.

ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!