ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮತ್ತು ನಾಳೆ ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸದಲ್ಲಿದ್ದಾರೆ. ಇವತ್ತು ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ ಮೈಸೂರಿನ ಆಯುಷ್ (ಎಐಐಎಸ್ಹೆಚ್)ನಲ್ಲಿ ಯಾವುದೇ ಚಿಕಿತ್ಸೆಗಳು ಲಭ್ಯ ಇರುವುದಿಲ್ಲ. ಜೊತೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿರುತ್ತದೆ.
ಅದರಂತೆ ಸಂಜೆ ವೇಳೆಗೆ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಈ ವೇಳೆ ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಎರಡು ಗಂಟೆಯಿಂದ ರಾತ್ರಿ ಎಂಟು ಗಂಟೆ ತನಕ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಹೋಗುವವರು ಈ ಬಗ್ಗೆ ಮಾಹಿತಿ ತಿಳಿದಿರಬೇಕು. ರಾಷ್ಟ್ರಪತಿ ಭೇಟಿ ನೀಡುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಸೆಪ್ಟೆಂಬರ್ 2, ಅಂದರೆ ನಾಳೆ ರಾಷ್ಟ್ರಪತಿಗಳು ಐತಿಹಾಸಿಕವಾದ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಭದ್ರತಾ ಹಿತದೃಷ್ಟಿಯಿಂದ ಹಾಗೂ ಶಿಷ್ಟಾಚಾರ ಪಾಲನೆಗಾಗಿ ನಾಳೆ ಪ್ರವಾಸಿಗರಿಗೆ ಅರಮನೆಯ ಪ್ರವೇಶ, ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಇಂದಿನಿಂದ ಮೈಸೂರು ಅರಮನೆ ಅವರಣದಲ್ಲಿ ನಡೆಯುವ ಧ್ವನಿ, ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿರುತ್ತದೆ.






