ಘಟನೆಯ ವಿವರ:
ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಧರ್ಮದ ವಿಚಾರವಾಗಿ ಭೀಕರ ದಾಳಿಯೊಂದು ನಡೆದಿದೆ. ಮೀರಾ ರಸ್ತೆ ಪೂರ್ವದಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕರ್ತವ್ಯದಲ್ಲಿದ್ದ ರಾಜ್ಕುಮಾರ್ ಮಿಶ್ರಾ ಮತ್ತು ಸುಬ್ರೋಟೊ ಸೇನ್ ಎಂಬ ಇಬ್ಬರು ಭದ್ರತಾ ಸಿಬ್ಬಂದಿಯ ಮೇಲೆ ಜುಬೈರ್ ಅನ್ಸಾರಿ (31) ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯು ಮೊದಲು ಅವರ ಧರ್ಮದ ಬಗ್ಗೆ ವಿಚಾರಿಸಿ, ನಂತರ ಇಸ್ಲಾಮಿಕ್ ಪ್ರಾರ್ಥನೆ (ಕಲ್ಮಾ) ಪಠಿಸುವಂತೆ ಒತ್ತಾಯಿಸಿದ್ದಾನೆ. ಅವರು ನಿರಾಕರಿಸಿದ ತಕ್ಷಣ ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾನೆ.
ಆರೋಪಿಯ ಹಿನ್ನೆಲೆ:
ಬಂಧಿತ ಆರೋಪಿ ಜುಬೈರ್ ಅನ್ಸಾರಿ ಸುಶಿಕ್ಷಿತನಾಗಿದ್ದು, 2019ರವರೆಗೆ ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡಿ ಭಾರತಕ್ಕೆ ಮರಳಿದ್ದನು. ಕಳೆದ ಕೆಲವು ತಿಂಗಳ ಹಿಂದಿನವರೆಗೂ ಈತ ಕೋಚಿಂಗ್ ಸೆಂಟರ್ ಒಂದರಲ್ಲಿ ರಸಾಯನಶಾಸ್ತ್ರ ಮತ್ತು ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಸದ್ಯ ಈತ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಆತನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಟಿಎಸ್ ತನಿಖೆಗೆ ಆದೇಶ:
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಾಜ್ಕುಮಾರ್ ಮಿಶ್ರಾ ಮತ್ತು ಸುಬ್ರೋಟೊ ಸೇನ್ ಅವರನ್ನು ವೋಕಾರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕೃತ್ಯದ ಹಿಂದೆ ಯಾವುದಾದರೂ ಉಗ್ರಗಾಮಿ ಸಂಘಟನೆಗಳ ಪ್ರಚೋದನೆ ಅಥವಾ ಸೈದ್ಧಾಂತಿಕ ಸಂಬಂಧಗಳಿವೆಯೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳಕ್ಕೆ (ATS) ವರ್ಗಾಯಿಸಲಾಗಿದೆ.




